
ಶಿವಮೊಗ್ಗ: ಸಮಾಜದಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನತೆಯನ್ನು ನೀಡುವ ಕೆಲಸ ಸರ್ಕಾರದ ಯೋಜನೆಗಳಿಂದ ಆಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಮಂಗಳವಾರ ಶ್ರೀ ಶಾರದಾದೇವಿ ಅಂಧರ ವಿಕಾಸ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 53 ಜನ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು.
ಸಮಾಜದಲ್ಲಿ ಇತರರಿಗಿಂತ ನಾವು ಭಿನ್ನವಾಗಿದ್ದೇವೆ ಎನ್ನುವ ಮನೋಭಾವ ವಿಕಲಚೇತನರಿಗೆ ಮೂಡಬಾರದು ಎಂದು ಸರ್ಕಾರ ವಿಕಲಚೇತನರಿಗೆ ಸಮಾಜದಲ್ಲಿ ಸಮಾನತೆಯನ್ನು ತರಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಯಾವುದಾದರು ಯೋಜನೆಗಳಲ್ಲಿ ಅನುದಾನದ ಕೊರತೆ ಅಥವಾ ಇನ್ನಾವುದೇ ರೀತಿಯ ತೊಂದರೆ ಉಂಟಾದರೆ ನನ್ನ ಗಮನಕ್ಕೆ ತನ್ನಿ ಪರಿಹಾರ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಮ್ಮ ಕೆಲಸ ಕೇವಲ ಭಾಷಣಗಳಿಗೆ ಮಾತ್ರ ಸೀಮಿತವಾಗಿರಬಾರದು ಅನುಷ್ಠಾನ ಮತ್ತು ಸೇವೆ ನೀಡುವಲ್ಲಿ ಮುಂದಾಗಬೇಕು ಎಂದರು.